Karwar|National Education Policy| ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಅನ್ವಯ ಒಂದನೇ ತರಗತಿಗೆ ಸೇರಲು ಮಗುವಿಗೆ ಜೂ.1ಕ್ಕೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ನಿಯಮ ಪೋಷಕರಿಗೆ ಶೈಕ್ಷಣಿಕ ಶಾಪವಾಗಿ ಪರಿಣಮಿಸಿದೆ.
ಸರ್ಕಾರ ಇತ್ತೀಚೆಗೆ ಘೋಷಿಸಿರುವ 60 ದಿನಗಳ ಸಡಿಲಿಕೆಯ ನಿಯಮದಿಂದ ರಾಜ್ಯದಲ್ಲಿ 4 ಲಕ್ಷಕ್ಕೂ ಹೆಚ್ಚು ಮಕ್ಕಳ ಭವಿಷ್ಯ ಅನಿಶ್ಚಿತತೆಯಲ್ಲಿದೆ. ಹೀಗಾಗಿ ವರ್ಷದ ಸಡಿಲಿಕೆ ಪ್ರಮಾಣವನ್ನು 5.5 ವರ್ಷಕ್ಕೆ ಇಳಿಕೆ ಮಾಡಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ. ಇದರಿಂದ ಸರ್ಕಾರ ಮತ್ತೊಂದು ರೀತಿಯಲ್ಲಿ ಇಕ್ಕಟ್ಟಿಗೆ ಸಿಲುಕುವಂತಾಗಿದೆ.
ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯದಂತೆ ಮಗುವಿನ ಮಾನಸಿಕ ಮತ್ತು ದೈಹಿಕ ಬೆಳವಣಿಗೆಯ ದೃಷ್ಟಿಯಿಂದ 6 ವರ್ಷವನ್ನು ಕನಿಷ್ಠ ವಯೋಮಿತಿಯನ್ನಾಗಿ ನಿಗದಿಪಡಿಸಲಾಗಿದೆ. ಈ ಹಿಂದೆ ರಾಜ್ಯದಲ್ಲಿ 5 ವರ್ಷ 5 ತಿಂಗಳು ತುಂಬಿದ ಮಗುವಿಗೆ ಒಂದನೇ ತರಗತಿಗೆ ಪ್ರವೇಶ ನೀಡಲಾಗುತ್ತಿತ್ತು. ದಶಕಗಳಿಂದ ನಡೆದುಬಂದಿದ್ದ ಈ ಪದ್ಧತಿಗೆ ಕಡಿವಾಣ ಹಾಕಿದ್ದರಿಂದ ಪೋಷಕರು ಗೊಂದಲಕ್ಕೀಡಾಗಿದ್ದಾರೆ. ಒಂದು ಮಗು ಈಗಾಗಲೇ ಎಲ್ಕೆಜಿ ಮತ್ತು ಯುಕೆಜಿಯನ್ನು ಯಶಸ್ವಿಯಾಗಿ ಮುಗಿಸಿದ್ದರೂ, ಜೂನ್ 1ಕ್ಕೆ ಕೇವಲ ಕೆಲವು ದಿನಗಳ ಅಂತರದಲ್ಲಿ 6 ವರ್ಷ ಪೂರೈಸದಿದ್ದರೆ, ಆ ಮಗು ಮತ್ತೆ ಯುಕೆಜಿಯಲ್ಲೇ ಕೂರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದು ಮಗುವಿನ ಮೇಲೆ ಮಾನಸಿಕ ಒತ್ತಡ ಹೇರುವುದಲ್ಲದೆ, ಪೋಷಕರಿಗೆ ಆರ್ಥಿಕ ಹೊರೆಯನ್ನೂ ಉಂಟುಮಾಡುತ್ತಿದೆ.
ಎನ್ಇಪಿ ಮತ್ತು ಆರ್ಟಿಇ ಅಡಿಯಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ ಕಡ್ಡಾಯವಾಗಿ 6 ವರ್ಷ ತುಂಬಿರಲೇಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮಗುವಿನ ಸಮಗ್ರ ಬೆಳವಣಿಗೆಯ ದೃಷ್ಟಿಯಿಂದ ಈ ವಯೋಮಿತಿ ನಿಗದಿಪಡಿಸಲಾಗಿದೆ. ಆದರೆ, ರಾಜ್ಯದಲ್ಲಿ ಈ ಮೊದಲು ಇದ್ದ 5 ವರ್ಷ 5 ತಿಂಗಳ ನಿಯಮಕ್ಕೆ ಒಗ್ಗಿಕೊಂಡಿದ್ದ ಪೋಷಕರಿಗೆ ಈ ಬದಲಾವಣೆ ಗೊಂದಲ ಉಂಟುಮಾಡಿತ್ತು. ಕಳೆದ ಶೈಕ್ಷಣಿಕ ವರ್ಷದಲ್ಲಿ ಪೋಷಕರು ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸಿದ್ದರು. ಅಂದು ಎಚ್ಚೆತ್ತ ಸರ್ಕಾರ, ಮಾನವೀಯ ನೆಲೆಯಲ್ಲಿ 5 ವರ್ಷ 10 ತಿಂಗಳು ತುಂಬಿದ ಮಕ್ಕಳಿಗೆ (2 ತಿಂಗಳ ವಿನಾಯಿತಿ) ಒಂದು ಬಾರಿ ಮಾತ್ರ ಅನ್ವಯವಾಗುವಂತೆ ದಾಖಲಾತಿಗೆ ಅವಕಾಶ ನೀಡಿತ್ತು. ಇದರಿಂದ ಸಾವಿರಾರು ಮಕ್ಕಳ ಶೈಕ್ಷಣಿಕ ವರ್ಷ ಉಳಿದಿತ್ತು. 2026-27ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ಸಮಸ್ಯೆ ಮತ್ತೆ ಉಲ್ಬಣಿಸಿದೆ.
ಅಂಕಿ-ಅಂಶಗಳ ಪ್ರಕಾರ, ರಾಜ್ಯಾದ್ಯಂತ ಸುಮಾರು 2.3 ಲಕ್ಷಕ್ಕೂ ಹೆಚ್ಚು ಮಕ್ಕಳು ಜೂನ್ 1ಕ್ಕೆ ಕೇವಲ ಕೆಲವು ದಿನಗಳ ಅಥವಾ ಗರಿಷ್ಠ 90 ದಿನಗಳ (3 ತಿಂಗಳು) ಅಂತರದಲ್ಲಿ 6 ವರ್ಷ ಪೂರೈಸಲು ವಿಫಲರಾಗಿದ್ದರು. ಈ ಮಕ್ಕಳು ಈಗಾಗಲೇ ಎಲ್ಕೆಜಿ ಹಾಗೂ ಯುಕೆಜಿ ಶಿಕ್ಷಣವನ್ನು ಯಶಸ್ವಿಯಾಗಿ ಮುಗಿಸಿದ್ದರೂ, ಹೊಸ ನಿಯಮ ಪಾಲನೆಯಾದರೆ ಕೇವಲ ವಯಸ್ಸಿನ ಕಾರಣಕ್ಕೆ ಮತ್ತೆ ಯುಕೆಜಿಯಲ್ಲೆ ಮುಂದುವರಿಯಬೇಕಾಗುತ್ತದೆ ಎಂಬ ಆತಂಕವನ್ನು ಪೋಷಕರು ವ್ಯಕ್ತಪಡಿಸಿದ್ದಾರೆ.
ಪೋಷಕರ ಸತತ ಪ್ರತಿಭಟನೆ ಹಾಗೂ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ, 60 ದಿನಗಳ (ಎರಡು ತಿಂಗಳು) ವಿನಾಯಿತಿಯನ್ನು ಘೋಷಿಸಿದೆ. ಈ ನಿರ್ಧಾರದಿಂದ ಸುಮಾರು 1 ಲಕ್ಷ ಮಕ್ಕಳಿಗೆ ಅನುಕೂಲವಾಗುತ್ತದೆ. ಆದರೆ, ಇನ್ನೂ 4 ಲಕ್ಷಕ್ಕೂ ಹೆಚ್ಚು ಮಕ್ಕಳು ಈ ಸಡಿಲಿಕೆಯ ಹೊರಗಿದ್ದಾರೆ. ಯಾರಿಗೆ 6 ವರ್ಷ ತುಂಬಲು 65 ದಿನಗಳು ಅಥವಾ 90 ದಿನಗಳು ಬಾಕಿ ಇದೆಯೋ, ಅಂತಹ ಮಕ್ಕಳು ಕೇವಲ ವಾರಗಳ ಅಂತರದಲ್ಲಿ ಒಂದು ವರ್ಷದ ಶೈಕ್ಷಣಿಕ ನಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರದ ಈ ನಡೆಗೆ ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿರುವ ಪೋಷಕರು, ಮಕ್ಕಳ ಪ್ರವೇಶಾತಿ ವಯೋಮಿತಿಯನ್ನು 5.5 ವರ್ಷಕ್ಕೆ ಇಳಿಕೆ ಮಾಡಬೇಕು. ಇದರಿಂದ ಇನ್ನಷ್ಟು ಮಕ್ಕಳಿಗೆ ಅನುಕೂಲವಾಗಲಿದೆ. ಈ ಮೊದಲು ಇದ್ದಂತಹ ನಿಯಮವನ್ನೇ ಸರ್ಕಾರ ಅನುಷ್ಠಾನಗೊಳಿಸಬೇಕು. ಇದರಿಂದ ಮಕ್ಕಳ ಭವಿಷ್ಯಕ್ಕೆ ಅನುಕೂಲವಾಗಲಿದೆ. ಇಲ್ಲದಿದ್ದರೆ ಒಂದು ವರ್ಷ ನಷ್ಟವಾಗಲಿದೆ. ಸರ್ಕಾರದ 60 ದಿನಗಳ ಸಡಿಲಿಕೆ ಮಾಡುವ ಬದಲು ವಯೋಮಿತಿಯನ್ನು ಕನಿಷ್ಠ 5.5 ವರ್ಷಕ್ಕೆ ಇಳಿಸಬೇಕು. ಮಗುವು ಕಲಿಕೆಯಲ್ಲಿ ಸಮರ್ಥವಾಗಿದ್ದರೂ ಕೇವಲ ವಯಸ್ಸಿನ ಕಾರಣಕ್ಕೆ ಒಂದು ವರ್ಷ ವ್ಯರ್ಥ ಮಾಡುವುದು ಸರಿಯಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
2026-27ನೇ ಸಾಲಿನ ಶೈಕ್ಷಣಿಕ ವರ್ಷವು ವಿಶೇಷ ಪರಿವರ್ತನಾ ವರ್ಷ ಎಂದು ಪರಿಗಣಿಸಿ, ಕನಿಷ್ಠ 3 ರಿಂದ 5 ತಿಂಗಳವರೆಗೆ ಸಡಿಲಿಕೆ ನೀಡುವುದು ಸೂಕ್ತ. ಶಿಕ್ಷಣ ತಜ್ಞರು, ಪೋಷಕರು ಮತ್ತು ಶಿಕ್ಷಕರೊಂದಿಗೆ ಚರ್ಚಿಸಿ ಒಂದು ವಯೋಮಿತಿಯನ್ನು ನಿಗದಿಪಡಿಸಬೇಕು. ಪ್ರತೀ ವರ್ಷದ ಗೊಂದಲ ತಪ್ಪಿಸಲು ಶಿಕ್ಷಣ ಕಾಯ್ದೆಗೆ ತಕ್ಷಣವೇ ತಿದ್ದುಪಡಿ ತಂದು, ಪೋಷಕರಲ್ಲಿ ಇರುವ ಅನಿಶ್ಚಿತತೆಯನ್ನು ಹೋಗಲಾಡಿಸಬೇಕು ಎಂಬ ಒತ್ತಾಯಗಳು ಜನರಿಂದ ಕೇಳಿಬಂದಿವೆ.
