ಗ್ರಾಮ ಪಂಚಾಯಿತಿಗಳು ಸ್ಥಳೀಯ ಸಾರ್ವಜನಿಕರ ಸಮಸ್ಯೆ ಆಲಿಸಿ ಅವುಗಳನ್ನು ಬಗೆಹರಿಸುವ ಕೇಂದ್ರಗಳಾಗಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
ಅವರು ಶುಕ್ರವಾರ ಹಿರೇಗುತ್ತಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಗ್ರಾಮದ ಜನತೆಯ ಸಮಸ್ಯೆಗಳನ್ನು ಗ್ರಾಮಗಳಲ್ಲಿಯೇ ಬಗೆಹರಿಸುವ ಉದ್ದೇಶದಿಂದ ಸರ್ಕಾರವು ಹಲವು ಸೇವೆಗಳನ್ನು ಪಂಚಾಯತ್ ಮೂಲಕವೇ ನೀಡುತ್ತಿದೆ. ಸಮಸ್ಯೆ ಪರಿಹಾರಕ್ಕೆ ಪಂಚಾಯತ್ ಗೆ ಆಗಮಿಸುವ ಸಾರ್ವಜನಿಕರ ಸಮಸ್ಯೆಗಳನ್ನು ಅಧಿಕಾರಿಗಳು ತಾಳ್ಮೆಯಿಂದ ಆಲಿಸಿ, ಸ್ಪಂದಿಸಿ ಅವುಗಳನ್ನು ಬಗೆಹರಿಸಿಕೊಡಬೇಕು ಎಂದರು.
ಶಾಸಕ ದಿನಕರ ಶೆಟ್ಟಿ ಮಾತನಾಡಿ, ಈ ಗ್ರಾಪಂ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ಸೇರಿದಂತೆ ಜನರ ಬೇಡಿಕೆಗಳಿಗೆ ತಕ್ಕಂತೆ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡಲಾಗಿದ್ದು ಈ ಭಾಗದ ಕಾಲೇಜಿನ ಕಟ್ಟಡಕ್ಕೂ ಅನುದಾನ ಒದಗಿಸಿದೆ. ಪಂಚಾಯತ್ ಕಟ್ಟಡಕ್ಕೆ ಹೆಚ್ಚುವರಿ ಅನುದಾನ ಒದಗಿಸುವ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಪoಚಾಯತ್ ಅಧ್ಯಕ್ಷ ಶಾಂತಾ ನಾರಾಯಣ ನಾಯ್ಕ, ಉಪಾಧ್ಯಕ್ಷೆ ವೆಂಕಮ್ಮ ಹರಿಕoತ್ರ, ತಹಸೀಲ್ದಾರ್ ಕೃಷ್ಣ ಕಾಮಕರ್, ತಾ. ಪಂ. ಕಾರ್ಯ ನಿರ್ವಹಣಾಧಿಕಾರಿ ರಾಜೇಂದ್ರ ಭಟ್, ಪಂಚಾಯಿತಿ ಸದಸ್ಯರು ಸೇರಿದಂತೆ ಹಲವರು ಇದ್ದರು.
