Karwar| ಕಳೆದ 45 ವರ್ಷಗಳಿಂದ ಹಳಿಯಾಳ ಕ್ಷೇತ್ರಕ್ಕೆ ದೇಶಪಾಂಡೆ ಅವರ ರೂಪದಲ್ಲಿ ‘ಶನಿ’ ಗಂಟುಬಿದ್ದಿದೆ. ಭ್ರಷ್ಟಾಚಾರದ ಮತ್ತೊಂದು ರೂಪವೇ ದೇಶಪಾಂಡೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅನುಭವದ ಕೊರತೆಯಿದೆ ಎಂದಿದ್ದ ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರ ಹೇಳಿಕೆಗೆ ಬಿಜೆಪಿ ಮುಖಂಡ, ಮಾಜಿ ಶಾಸಕ ಸುನೀಲ್ ಹೆಗಡೆ ತೀವ್ರ ವಾಗ್ದಾಳಿ ಮಾಡಿದ್ದಾರೆ.

ಕಾರವಾರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಮಾಡಿದ ಅವರು ಹಿರಿಯ ಕಾಂಗ್ರೆಸ್ ನಾಯಕನ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ದೇಶಪಾಂಡೆ ಅವಧಿಯಲ್ಲಿ ಸರ್ಕಾರಿ ಆಸ್ತಿ ಅತಿಕ್ರಮಣಗಳಿಗೆ ಕಡಿವಾಣ ಇಲ್ಲವಾಗಿದೆ ಎಂದು ಟೀಕಿಸಿದ‌ ಹೆಗಡೆ, ಕಾಗೇರಿ ಅವರು ರೈತರಿಗೆ ಬೆಳೆ ವಿಮೆ ಕೊಡಿಸಿದ್ದಾರೆ ಮತ್ತು ನೆಟ್‌ವರ್ಕ್ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಕಾಗೇರಿ ಅವರನ್ನು ಟೀಕಿಸುವ ಮೊದಲು ದೇಶಪಾಂಡೆ ಅವರು ತಮ್ಮ ಕ್ಷೇತ್ರದ ರಸ್ತೆಗಳನ್ನು ಶಿರಸಿ-ಸಿದ್ದಾಪುರದ ರಸ್ತೆಗಳಿಗೆ ಹೋಲಿಸಿ ನೋಡಲಿ ಮತ್ತು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಸವಾಲು ಹಾಕಿದರು.

ದೇಶಪಾಂಡೆ ಅವರು ಒಂಬತ್ತು ಬಾರಿ ಶಾಸಕರಾಗಿದ್ದರೂ, ಜಿಲ್ಲೆಯ ಅಭಿವೃದ್ಧಿಯನ್ನು ಕ್ಷೀಣಗೊಳಿಸಿದ್ದಾರೆ. ರಾಮನಗರ ಅನಮೋಡ ರಸ್ತೆಯ ದುಃಸ್ಥಿತಿಯೇ ಅವರ ವೈಫಲ್ಯಕ್ಕೆ ಸಾಕ್ಷಿ. ಪ್ರತಿ ವರ್ಷ ರಸ್ತೆ ದುರಸ್ತಿಯನ್ನು ಹಬ್ಬದಂತೆ ಮಾಡುತ್ತಾ, ಹಣ ಲೂಟಿ ಮಾಡಲಾಗುತ್ತಿದೆ.

ಹಳಿಯಾಳ ಜೊಯಿಡಾದಲ್ಲಿ ಮಳೆ ಮಾಪನ ಕೇಂದ್ರಗಳು ಹಾಳಾಗಿವೆ. ಮಳೆ ಮಾಪನ ನಿರ್ವಹಣೆಗೂ ಹಣವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಅಂಬೇವಾಡಿ ರೈಲು ನಿಲ್ದಾಣ ತಮ್ಮ ಸಾಧನೆ ಎನ್ನುವ ಆರ್.ವಿ. ದೇಶಪಾಂಡೆ ಅವರು, ಅಂಬೇವಾಡಿಯಿಂದ ಹಳೆ ದಾಂಡೇಲಿ ತನಕ ರೈಲ್ವೆ ಸಂಚಾರ ಯಾಕೆ ತರಲಿಲ್ಲ ? ಎಂದು ಪ್ರಶ್ನಿಸಿದರು.

ಹಳೆ ದಾಂಡೇಲಿತನಕ ರೈಲು ಹಳಿ ಮಾರ್ಗ ಇತ್ತು. ಹಳಿ‌ ಇದ್ದ ಮಾರ್ಗದ ಅಕ್ಕ ಪಕ್ಕ, ಹಳಿ ಬಳಿಯೇ ಆಶ್ರಯ ಮನೆಗಳನ್ನು ಹಂಚಿ ಮಾಜಿ ಸಚಿವ, ಹಾಲಿ ಸಚಿವ ದೇಶಪಾಂಡೆ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಿದರು.

ದೇಶಪಾಂಡೆ ಅವರು ಪ್ರವಾಸೋದ್ಯಮ ಮತ್ತು ಉನ್ನತ ಶಿಕ್ಷಣ ಮಂತ್ರಿಯಾಗಿದ್ದಾಗ ಜಿಲ್ಲೆಗೆ ನೀಡಿದ ಕೊಡುಗೆ ಶೂನ್ಯ. ಒಂದು ವಿಶ್ವವಿದ್ಯಾಲಯ, ಹಾಲಿನ ಡೇರಿ ಅಥವಾ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲು ಅವರಿಂದ ಸಾಧ್ಯವಾಗಿಲ್ಲ. ಹಳಿಯಾಳದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ರೋಗಿಗಳನ್ನು ಧಾರವಾಡ ಅಥವಾ ಹುಬ್ಬಳ್ಳಿಗೆ ಕಳುಹಿಸಲಾಗುತ್ತಿದೆ ಎಂದರು.

ದಾಂಡೇಲಿಯಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಪ್ರವಾಸೋದ್ಯಮ ಮಾಹಿತಿ ಕೇಂದ್ರ ಮತ್ತು ಯಾತ್ರಿ ನಿವಾಸಗಳು ಬಡವರಿಗೆ ಪ್ರಯೋಜನವಾಗದೆ ಪಾಳುಬಿದ್ದಿವೆ. ಕೈಗಾರಿಕಾ ಮಂತ್ರಿಯಾಗಿದ್ದಾಗ ಹೊಸ ಕೈಗಾರಿಕೆ ತರುವುದಿರಲಿ , ಇದ್ದ ಎರಡು ಕಾರ್ಖಾನೆಗಳು ಮುಚ್ಚಲು ದೇಶಪಾಂಡೆ ಅವರೇ ಕಾರಣ” ಎಂದು ಸುನೀಲ್ ಹೆಗಡೆ ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬ್ಳೆ, ಸೂರಜ್ ಸೋನಿ, ನಾಗೇಶ ಕುರುಡೇಕರ್ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.