ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರ ಬಿಡುಗಡೆಗೆ ಮದ್ರಾಸ್ ಹೈಕೋರ್ಟನಲ್ಲಿ ಹಿನ್ನಡೆಯಾಗಿದೆ. ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡುವಂತೆ ಈ ಹಿಂದೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಮಂಗಳವಾರ ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ. ಸೆನ್ಸಾರ್ ಮಂಡಳಿಗೆ ಉತ್ತರಿಸಲು ಕಾಲಾವಕಾಶ ನೀಡಬೇಕಿತ್ತು ಎಂಬ ಕಾರಣಕ್ಕೆ ಆದೇಶವನ್ನು ರದ್ದುಗೊಳಿಸಿದೆ. ಇದರಿಂದ ಪೊಂಗಲ್ ಹಬ್ಬಕ್ಕೂ ಮುನ್ನ ಬಿಡುಗಡೆಯಾಗಬೇಕಿದ್ದ ಸಿನಿಮಾ, ಸೆನ್ಸಾರ್ ಮಂಡಳಿಯ ತಕರಾರಿನಿಂದಾಗಿ ವಿಳಂಬವಾದಂತಾಗಿದೆ.
ಚೆನ್ನೈ: ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ ಅವರ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ಬಿಡುಗಡೆಗೆ ಎದುರಾಗಿರುವ ಕಂಟಕ ಸದ್ಯಕ್ಕೆ ನಿವಾರಣೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಮಂಗಳವಾರ ಮದ್ರಾಸ್ ಹೈಕೋರ್ಟ್ ನೀಡಿರುವ ತೀರ್ಪು ಚಿತ್ರತಂಡಕ್ಕೆ ಮತ್ತು ಅಭಿಮಾನಿಗಳಿಗೆ ದೊಡ್ಡ ಆಘಾತವನ್ನು ನೀಡಿದೆ. ಈ ಹಿಂದೆ ಏಕಸದಸ್ಯ ಪೀಠವು ನೀಡಿದ್ದ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠವು ರದ್ದುಗೊಳಿಸಿದ್ದು, ಇದರಿಂದಾಗಿ ಚಿತ್ರದ ಬಿಡುಗಡೆ ಮತ್ತಷ್ಟು ವಿಳಂಬವಾಗುವುದು ಖಚಿತವಾಗಿದೆ. ಸೆನ್ಸಾರ್ ಮಂಡಳಿಯ ಪ್ರಮಾಣಪತ್ರ ಸಿಗದೆ ಸಿನಿಮಾ ಥಿಯೇಟರ್ಗಳಲ್ಲಿ ಬಿಡುಗಡೆಗೊಳ್ಳುವಂತಿಲ್ಲ. ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡುವ ವಿಚಾರವಾಗಿ ಮದ್ರಾಸ್ ಹೈಕೋರ್ಟ್ನ ಏಕಸದಸ್ಯ ಪೀಠವು ಈ ಹಿಂದೆ ನಿರ್ಮಾಪಕರ ಪರವಾಗಿ ಆದೇಶ ನೀಡಿತ್ತು. ಆದರೆ, ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಿದ ವಿಭಾಗೀಯ ಪೀಠವು, ಏಕಸದಸ್ಯ ಪೀಠದ ಆದೇಶವನ್ನು ಬದಿಗೆ ಸರಿಸಿ ಆದೇಶ ಹೊರಡಿಸಿದೆ.
ಏಕಸದಸ್ಯ ಪೀಠವು ತೀರ್ಪು ನೀಡುವ ಮುನ್ನ ಸೆನ್ಸಾರ್ ಮಂಡಳಿಗೆ (ಸಿಬಿಎಫ್ಸಿ) ತಮ್ಮ ವಾದವನ್ನು ಮಂಡಿಸಲು ಅಥವಾ ಪ್ರತಿ ವಾದವನ್ನು ಸಲ್ಲಿಸಲು ಕಾಲಾವಕಾಶ ನೀಡಬೇಕಿತ್ತು,” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ತಾಂತ್ರಿಕ ಕಾರಣದಿಂದಾಗಿ ಹಳೆಯ ಆದೇಶ ರದ್ದಾಗಿದ್ದು, ‘ಜನ ನಾಯಗನ್’ ಸೆನ್ಸಾರ್ ಪ್ರಮಾಣಪತ್ರ ಪ್ರಕರಣದ ವಿಚಾರಣೆ ಮದ್ರಾಸ್ ಹೈಕೋರ್ಟ್ನಲ್ಲಿ ಹೊಸದಾಗಿ ಆರಂಭವಾಗಲಿದೆ.
ಅಂದುಕೊಂಡಂತೆ ನಡೆದಿದ್ದರೆ ‘ಜನ ನಾಯಗನ್’ ಚಿತ್ರವು ಪೊಂಗಲ್ ಹಬ್ಬಕ್ಕೂ ಮುನ್ನ ಅಂದರೆ ಜನವರಿ ೯ರಂದೇ ವಿಶ್ವಾದ್ಯಂತ ಬಿಡುಗಡೆಯಾಗಬೇಕಿತ್ತು. ಆದರೆ ಬಿಡುಗಡೆಗೆ ಕೆಲವೇ ದಿನಗಳಿರುವಾಗ, ದೂರಿನ ಆಧಾರದ ಮೇಲೆ ಚಿತ್ರವನ್ನು ಸೆನ್ಸಾರ್ ಮಂಡಳಿಯು ‘ಪರಿಷ್ಕರಣಾ ಸಮಿತಿ’ಗೆ ಕಳುಹಿಸಿತ್ತು. ಇದನ್ನು ಪ್ರಶ್ನಿಸಿ ಚಿತ್ರ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ ಕೋರ್ಟ್ ಮೆಟ್ಟಿಲೇರಿತ್ತು.
ಮದ್ರಾಸ್ ಹೈಕೋರ್ಟ್ನ ಏಕಸದಸ್ಯ ಪೀಠವು, ಕೆಲವು ಮಾರ್ಪಾಡುಗಳೊಂದಿಗೆ ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರ ನೀಡುವಂತೆ ಸೆನ್ಸಾರ್ ಮಂಡಳಿಗೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಸೆನ್ಸಾರ್ ಮಂಡಳಿ ಮೇಲ್ಮನವಿ ಸಲ್ಲಿಸಿತು. ಆಗ ದ್ವಿಸದಸ್ಯ ಪೀಠವು ಪ್ರಮಾಣಪತ್ರ ನೀಡುವ ಆದೇಶಕ್ಕೆ ತಡೆ ನೀಡಿತ್ತು.
ಬಳಿಕ ಕೆವಿಎನ್ ಪ್ರೊಡಕ್ಷನ್ಸ್ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತಾದರೂ, ಜನವರಿ ೧೫ ರಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶೀಘ್ರ ವಿಚಾರಣೆಗೆ ನಿರಾಕರಿಸಿ ಮದ್ರಾಸ್ ಹೈಕೋರ್ಟ ಗೆ ಹೋಗುವಂತೆ ಸೂಚಿಸಿ ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಜನವರಿ ೨೦ರಂದು ವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ ಮದ್ರಾಸ್ ಹೈಕೋರ್ಟ್, ಇಂದು ಅಂದರೆ ಜನವರಿ ೨೭ರಂದು ಏಕಸದಸ್ಯ ಪೀಠದ ಆದೇಶವನ್ನು ರದ್ದುಗೊಳಿಸಿದೆ. ರಾಜಕೀಯಕ್ಷೇತ್ರಕ್ಕೆ ಧುಮುಕುವ ಮುನ್ನ ವಿಜಯ್ ನಟಿಸಿರುವ ಕೊನೆಯ ಸಿನಿಮಾ ಇದಾಗಿದೆ ಎಂಬ ಮಾತುಗಳಿರುವುದರಿಂದ ‘ಜನ ನಾಯಗನ್’ ಮೇ¯ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆಯಿದೆ. ಎಚ್. ವಿನೋದ್ ನಿರ್ದೇಶನದ ಈ ಚಿತ್ರದಲ್ಲಿ ಪೂಜಾ ಹೆಗ್ಡೆ, ಬಾಬಿ ಡಿಯೋಲ್, ಮಮಿತಾ ಬೈಜು, ಗೌತಮ್ ಮೆನನ್ ಮತ್ತು ಪ್ರಕಾಶ್ ರಾಜ್ ಅವರಂತಹ ಘಟಾನುಘಟಿ ಕಲಾವಿದರು ನಟಿಸಿದ್ದಾರೆ.
ಸದ್ಯಕ್ಕೆ ಸಿನಿಮಾಗೆ ಸೆನ್ಸಾರ್ ಪ್ರಮಾಣಪತ್ರ ಸಿಗದೆ ಬಿಡುಗಡೆ ದಿನಾಂಕ ನಿಗದಿಪಡಿಸುವುದು ಅಸಾಧ್ಯವಾಗಿದೆ. ಹೀಗಾಗಿ ಅಭಿಮಾನಿಗಳು ಇನ್ನಷ್ಟು ದಿನ ಕಾಯಬೇಕಾಗಿದೆ.
